ಹವಾಮಾನ ಇಲಾಖೆ ಮುನ್ಸೂಚನೆ: ಇಂದಿನಿಂದ ಮೂರು ದಿನ ಮಳೆ
ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕಾಲಿಕ ಹವಾಮಾನ ಬದಲಾವಣೆಗಳ ಪರಿಣಾಮ ಇಂದಿನಿಂದ ಬೆಂಗಳೂರಿನ ಅಲ್ಲಲ್ಲಿ ಹಗುರ ಮಳೆ ನಿರೀಕ್ಷೆ ಇದೆ ಎಂದು ಇಲಾಖೆ ಮಾಹಿತಿ ನೀಡಿದೆ.
ನಗರದಲ್ಲಿ ಕಳೆದ ಎರಡು ದಿನದಿಂದ ಮಧ್ಯಾಹ್ನ ಹೊರತುಪಡಿಸಿ ಉಳಿದ ಸಮಯದಲ್ಲಿ ತಾಪಮಾನದಲ್ಲಿ ಇಳಿಕೆಯಾಗಿದೆ. ಇನ್ನು ರಾಜ್ಯದೆಲ್ಲೆಡೆ ಸಾಧಾರಣ ಮಳೆಯಾಗಲಿದೆ.
ಬಹುತೇಕ ಕಡೆ ಬಿಸಿಲಿನ ಧಗೆ ಹೆಚ್ಚುತ್ತಿದ್ದು ಗುಡುಗು ಸಹಿತ ಮಳೆ ಬೀಳಲಿದೆ. ಮಂಗಳವಾರ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಆಗುಂಬೆ ಸೇರಿದಂತೆ ಕೆಲವೆಡೆಗಳಲ್ಲಿ ಜೋರು ಮಳೆಯಾಗಿತ್ತು. ಇದೇ ರೀತಿ ಮಾರ್ಚ್ 19ರವರೆಗೆ ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಬೀಳುವ ನಿರೀಕ್ಷೆ ಇದೆ ಎಂದು ಇಲಾಖೆ ಹೇಳಿದೆ.