ರಾಜ್ಯದಲ್ಲಿ ಬಿಜೆಪಿ 140 ಸ್ಥಾನದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ: ಬಿ ಎಸ್ ಯಡಿಯೂರಪ್ಪ
ಬೆಂಗಳೂರು: ಕಾಂಗ್ರೆಸ್ಗೆ ಭವಿಷ್ಯವಿಲ್ಲ ಎಂದು ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ಗೆ ಭವಿಷ್ಯವಿಲ್ಲ, ಈ ಚುನಾವಣೆ ನಂತರ ಕಾಂಗ್ರೆಸ್ನವರನ್ನು ಹುಡುಕಬೇಕಾಗಬಹುದು.
ರಾಜ್ಯದಲ್ಲಿ ಬಿಜೆಪಿ 140 ಸ್ಥಾನದೊಂದಿಗೆ ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದರು. ಇಂದು ಚಿತ್ರದುರ್ಗ ಜಿಲ್ಲಾ ಪ್ರವಾಸಕ್ಕೆ ತೆರಳುತ್ತಿದ್ದು, ನಾಳೆ ತುಮಕೂರು ಪ್ರವಾಸ ಮಾಡಲಿದ್ದೇನೆ. ಯಾರು ಏನೇ ಹೇಳಿದರೂ ವಾತಾವರಣ ತುಂಬಾ ಚೆನ್ನಾಗಿದೆ. 140ಕ್ಕೂ ಹೆಚ್ಚು ಸ್ಥಾನ ಗೆದ್ದು ಬಿಜೆಪಿ ಮತ್ತೆ ಅಧಿಕಾರಕ್ಕೆ ನಿಶ್ಚಿತ ಎಂದು ಭವಿಷ್ಯ ನುಡಿದರು. ರಾಜ್ಯಕ್ಕೆ ಈಗ ರಾಹುಲ್ ಗಾಂಧಿ ಬಂದಿದ್ದಾರೆ.
ಆದರೆ ರಾಹುಲ್ ಗಾಂಧಿಗೂ ಮೋದಿಗೂ ಹೋಲಿಕೆ ಸಾಧ್ಯವಿಲ್ಲ, ಯಾವುದೇ ಸರಿಯಾದ ನಾಯಕತ್ವ ಕಾಂಗ್ರೆಸ್ಗೆ ಇಲ್ಲ. ಹಾಗಾಗಿ ಇತ್ತೀಚೆಗೆ ನಡೆದ ಮೂರು ಚುನಾವಣೆಯಲ್ಲಿ ಕಾಂಗ್ರೆಸ್ ಸೋತಿದೆ. ಕಾಂಗ್ರೆಸ್ಗೆ ಭವಿಷ್ಯವಿಲ್ಲ. ಈ ಚುನಾವಣೆಯಲ್ಲಿ ಬಿಜೆಪಿ 140 ಸ್ಥಾನ ಗೆದ್ದರೆ ಕಾಂಗ್ರೆಸ್ನವರು ಎಲ್ಲಿದ್ದಾರೆ ಎಂದು ಹುಡುಕಬೇಕಾಗಲಿದೆ ಎಂದರು. ಉರಿಗೌಡ ನಂಜೇಗೌಡ ಸಿನಿಮಾಗೆ ನಿರ್ಮಲಾನಂದನಾಥ ಶ್ರೀಗಳು ಬ್ರೇಕ್ ಹಾಕಿರುವ ವಿಚಾರದ ಕುರಿತ ಪ್ರಶ್ನೆಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಯಡಿಯೂರಪ್ಪ, ಆ ರೀತಿಯಲ್ಲಿ ಪ್ರಶ್ನೆ ಕೇಳಬೇಡಿ ಎನ್ನುತ್ತಾ ನಿರ್ಗಮಿಸಿದರು.