ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ತಡೆ ನೀಡಿದ ಹೈಕೋರ್ಟ್
ಬೆಂಗಳೂರು: ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮುರುಘಾ ಶ್ರೀಗಳ ವಿರುದ್ಧದ ಸಾಕ್ಷ್ಯ ವಿಚಾರಣಾ ಪ್ರಕ್ರಿಯೆಗೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಅರ್ಜಿಗಳ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿತು.
ಅರ್ಜಿದಾರರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿ ವಿ ನಾಗೇಶ್ ಅವರು ಪ್ರಕರಣಕ್ಕೆ ಅನ್ವಯಿಸದ ಕಾಯಿದೆಯ ವಿವಿಧ ಸೆಕ್ಷನ್ಗಳನ್ನು ಸೇರಿಸಿ, ಆರೋಪ ಪಟ್ಟಿ ಸಲ್ಲಿಸಲಾಗಿದೆ. ಇದು ಕಾನೂನಿಗೆ ವಿರುದ್ಧವಾಗಿವೆ. ಆರೋಪಗಳಿಗೆ ಸಂಬಂಧಿಸಿದಂತೆ ಚಿತ್ರದುರ್ಗದ ವಿಶೇಷ ನ್ಯಾಯಾಲಯವು 2023ರ ಏಪ್ರಿಲ್ 20ರಂದು ಶರಣರ ವಿರುದ್ಧ ಆರೋಪ ಹೊರಿಸಿ ಸಾಕ್ಷಿ ವಿಚಾರಣೆ ನಡೆಸಲು ಆದೇಶಿಸಿದೆ.
ಈ ಆದೇಶ ದೋಷಪೂರಿತವಾಗಿದ್ದು ಇದಕ್ಕೆ ತಡೆ ನೀಡಬೇಕು ಎಂದು ಕೋರಿದರು. ಇದನ್ನು ಮಾನ್ಯ ಮಾಡಿದ ಪೀಠವು ಚಿತ್ರದುರ್ಗದ ವಿಶೇಷ ನ್ಯಾಯಾಲಯದ ವಿಚಾರಣೆಯ ಮುಂದಿನ ಪ್ರಕ್ರಿಯೆಗೆ ತಾತ್ಕಾಲಿಕ ತಡೆ ನೀಡಿ ವಿಚಾರಣೆಯನ್ನು ಜೂನ್ 21ಕ್ಕೆ ಮುಂದೂಡಿತು.