ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ
ಬೆಂಗಳೂರು: ವಿಧಾನಸಭೆಯ ಚುನಾವಣೆಯ(Karnataka Election) ದಿನವಾದ ಮೇ 10 ರಂದು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನದಲ್ಲಿ (Bannerghatta National Park)ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ. ಮೇ 10 ರಂದು ಸಾರ್ವತ್ರಿಕ ಚುನಾವಣೆಯ ಮತದಾನ ನಡೆಯಲಿದೆ.
ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಮತದಾನ ದಿನದಂದು ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮತದಾನ ಶೇಕಡಾವಾರು ಹೆಚ್ಚಿಸಲು ಮುಂದಾದ ಚುನಾವಣಾ ಆಯೋಗ ಬೆಂಗಳೂರಿನ ಸುತ್ತಲಿನ ಪ್ರದೇಶಗಳಲ್ಲಿ ಇರುವ ಎಲ್ಲ ಪ್ರವಾಸಿ ತಾಣಗಳನ್ನು ಬಂದ್ ಮಾಡಲು ಮುಂದಾಗಿದೆ. ಇನ್ನು ಮತದಾನ ದಿನದಂದು ಎಲ್ಲ ಉದ್ಯೋಗಿಗಳು ಹಾಗೂ ಕಾರ್ಖಾನೆಗಳಿಗೆ ರಜೆ ಘೋಷಣೆ ಮಾಡಲಾಗುತ್ತದೆ.
ಆದರೆ, ಈ ರಜಾ ದಿನದಂದು ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳದೇ ಬೆಂಗಳೂರಿನ ಸುತ್ತಲಿನ ಪ್ರವಾಸಿ ತಾಣಗಳಿಗೆ ಭೇಟಿ ನೀಡುವ ಪ್ರಮಾಣ ಹೆಚ್ಚಾಗಿರುತ್ತಿತ್ತು. ಆದರೆ, ಈ ಬಾರಿ ಕೇಂದ್ರ ಚುನಾವಣಾ ಆಯೋಗವು ಬೆಂಗಳೂರಿನ ಮತದಾನ ಪ್ರಮಾಣವನ್ನು ಹೆಚ್ಚಳ ಮಾಡಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಮತದಾನ ನಡೆಯುವ ದಿನದಂದು ಪ್ರವಾಸಿ ತಾಣಗಳನ್ನು ಬಂದ್ ಮಾಡಲಾಗುತ್ತಿದೆ. ಬೆಂಗಳೂರಿನ ಬನ್ನೇರುಘಟ್ಟ ರಾಷ್ಟ್ರೀಯ ಜೈವಿಕ ಉದ್ಯಾನದ ಮೃಗಾಲಯ, ಸಿಂಹ, ಹುಲಿ, ಕರಡಿ, ಸಸ್ಯಹಾರಿ ಸಫಾರಿಗಳು ಮತ್ತು ಚಿಟ್ಟೆ ಉದ್ಯಾನವನವನ್ನು ಕೂಡ ಬಂದ್ ಮಾಡಲಾಗುತ್ತದೆ.