ಅಮಿತ್ ಶಾ ಸಮ್ಮುಖದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ; ಚುನಾವಣೆ ಸಿದ್ಧತೆ ಕುರಿತು ಚರ್ಚೆ
ಬೆಂಗಳೂರು: ಇಂದು ರಾತ್ರಿ 8.30ಕ್ಕೆ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ತಾಜ್ ವೆಸ್ಟ್ ಎಂಡ್ ಹೋಟೆಲ್ನಲ್ಲಿ ಅಮಿತ್ ಶಾ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದ್ದಾರೆ. ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.
ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ಧರ್ಮೇಂದ್ರ ಪ್ರಧಾನ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್, ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ಸೇರಿದಂತೆ ಕೋರ್ ಕಮಿಟಿ ಸದಸ್ಯರು ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಪ್ರತಿ ವಿಧಾನಸಭಾ ಕ್ಷೇತ್ರದಿಂದ ಜಿಲ್ಲಾ ಸಮಿತಿಗಳು ಕಳುಹಿಸಿಕೊಟ್ಟಿರುವ ಮೂರು ಹೆಸರುಗಳ ಕುರಿತು ಪರಾಮರ್ಶೆ ನಡೆಸಲಿದ್ದು, ಎಷ್ಟು ಜನ ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಕು, ಯಾವ ಕ್ಷೇತ್ರದಲ್ಲಿ ಹೊಸಬರಿಗೆ ಅವಕಾಶ ನೀಡಬೇಕು, ನಮ್ಮ ಶಾಸಕರಿಲ್ಲದ ಕ್ಷೇತ್ರಗಳಲ್ಲಿ ಕಳೆದ ಬಾರಿಯ ಪರಾಜಿತ ಅಭ್ಯರ್ಥಿಗೆ ಅವಕಾಶ ನೀಡಬೇಕೋ ಅಥವಾ ಹೊಸಬರಿಗೆ ಅವಕಾಶ ನೀಡಬೇಕೋ ಎನ್ನುವ ಕುರಿತು ಚರ್ಚೆ ನಡೆಸಲಾಗುತ್ತದೆ. ಎಷ್ಟು ಜನ ಹಾಲಿ ಶಾಸಕರಿಗೆ ಟಿಕೆಟ್ ಕೊಡಬೇಕು ಎನ್ನುವುದನ್ನು ಮೊದಲು ಅಂತಿಮಗೊಳಿಸಿ ನಂತರ ಉಳಿದ ಕ್ಷೇತ್ರಗಳಿಗೆ ಎರಡು ಹೆಸರನ್ನು ಅಂತಿಮಗೊಳಿಸಲಾಗುತ್ತದೆ ಎಂದು ತಿಳಿದುಬಂದಿದೆ.