ಪ್ರತಿಯೊಬ್ಬರು ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚಿನ ಗಮನ ಕೊಡಬೇಕು: ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್
ಬೆಂಗಳೂರು: ಪ್ರತಿಯೊಬ್ಬರು ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚಿನ ಗಮನ ಕೊಡಬೇಕು ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ್ ಹೇಳಿದ್ದಾರೆ. ಮಲ್ಲೇಶ್ವರಂ ಕ್ಷೇತ್ರದ ವ್ಯಾಪ್ತಿಯ ಗಾಂಧೀಗ್ರಾಮದಲ್ಲಿ ಉನ್ನತೀಕರಿಸಿದ ಸಮಗ್ರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಪ್ರಧಾನಮಂತ್ರಿ ಜನೌಷಧ ಕೇಂದ್ರ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ ಅವರು, ಸ್ಥಳೀಯರಿಗೆ ಉಚಿತವಾಗಿ ಅತ್ಯುತ್ತಮ ಚಿಕಿತ್ಸೆ ಸಿಗಬೇಕು ಎನ್ನುವ ಧ್ಯೇಯದೊಂದಿಗೆ ಈ ಆಸ್ಪತ್ರೆ ಆರಂಭಿಸಲಾಗಿದೆ.
ಇಲ್ಲಿ ಪರಿಣತ ವೈದ್ಯರಿದ್ದು, ವರ್ಚುಯಲ್ ಕ್ಲಿನಿಕ್ ಕೂಡ ಇದೆ. ಆಧುನಿಕತೆ, ಒತ್ತಡ, ವೃತ್ತಿಗಳ ಸಂಕೀರ್ಣತೆ, ಜೀವನಶೈಲಿ ಇತ್ಯಾದಿಗಳಿಂದ ಆಯುಸ್ಸು 90 ವರ್ಷಗಳಿಂದ 70 ವರ್ಷಕ್ಕೆ ಇಳಿದಿದೆ. ಆದ್ದರಿಂದ ಆರೋಗ್ಯ ರಕ್ಷಣೆಯ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಈ ಆಸ್ಪತ್ರೆಯಲ್ಲಿ ಎಲ್ಲ ವೈದ್ಯಕೀಯ ಸೌಲಭ್ಯಗಳೂ ಇವೆ ಎಂದು ಅವರು ಹೇಳಿದರು. ಈ ಸಂದರ್ಭದಲ್ಲಿ ಪಾಲಿಕೆ ಆರೋಗ್ಯ ಆಯುಕ್ತ ಡಾ.ತ್ರಿಲೋಕಚಂದ್ರ, ಪಶ್ಚಿಮ ವಲಯ ಆಯುಕ್ತ ಡಾ.ದೀಪಕ್, ಜಂಟಿ ಆಯುಕ್ತ ಶ್ರೀನಿವಾಸ, ಪಾಲಿಕೆ ಮಾಜಿ ಸದಸ್ಯ ಮಂಜುನಾಥ ರಾಜು, ಮಂಜುನಾಥ, ಬಿಜೆಪಿ ಮುಖಂಡರಾದ ಸುರೇಶಗೌಡ, ನಾಗೇಶ ಉಪಸ್ಥಿತರಿದರು.