ಫ್ಲೆಕ್ಸ್, ಬ್ಯಾನರ್, ಕ್ರಮ ಜರುಗಿಸದ ಅಧಿಕಾರಿಗಳ ವಿರುದ್ಧ ಕ್ರಮ: ತುಷಾರ್ ಗಿರಿನಾಥ್
ಬೆಂಗಳೂರು: ಫ್ಲೆಕ್ಸ್, ಬ್ಯಾನರ್ ಅಳವಡಿಕೆ ಬಗ್ಗೆ ಕ್ರಮ ಕೈಗೊಳ್ಳದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಬಿಬಿಎಂಪಿ ಆಯುಕ್ತರು ಎಚ್ಚರಿಕೆ ನೀಡಿದ್ದಾರೆ. ಬಿಬಿಎಂಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಿಯಮ ಉಲ್ಲಂಘನೆ ಆಗದಂತೆ ನಾವು ಕ್ರಮ ವಹಿಸುತ್ತಿದ್ದೇವೆ.
ಈಗಾಗಲೇ ವಲಯವಾರು ಬ್ಯಾನರ್, ಫ್ಲೆಕ್ಸ್ ವಿರುದ್ಧ ಕಾರ್ಯಾಚರಣೆ ನಡೆಸಿ ತೆರವುಗೊಳಿಸಲಾಗುತ್ತಿದೆ. ಅಧಿಕಾರಿಗಳು ಕೂಡ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಬೇಕು. ಇಲ್ಲದಿದ್ದರೆ ಅವರ ವಿರುದ್ಧವೂ ಕ್ರಮ ಜರುಗಿಸಲಾಗುವುದು ಎಂದರು.
ರಾಜಕಾಲುವೆ ಹೂಳೆತ್ತುವ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, “ನಿರಂತರವಾಗಿ ರಾಜಕಾಲುವೆಗಳನ್ನು ಸ್ವಚ್ಛಗೊಳಿಸಬೇಕಿದೆ. ನಗರದಲ್ಲಿ 90 ಕಿ.ಮೀ ಉದ್ದದ ರಾಜಕಾಲುವೆ ಇದೆ. ಇದರಲ್ಲಿ ಶೇ. 50ರಷ್ಟು ಲೈನ್ಡ್ ಕಾಲುವೆ ಇದ್ದು ಇದಕ್ಕಾಗಿ ಟೆಂಡರ್ ಕರೆದು ಆಯಾ ವಿಧಾನಸಭಾ ಕ್ಷೇತ್ರಗಳ ಪ್ರಕಾರ ಕಾಂಟ್ರಾಕ್ಟರ್ಗಳನ್ನು ನೇಮಿಸಲಾಗಿದೆ. ಈ ಹಿಂದೆ ಟೆಂಡರ್ ಕರೆದು ಒಬ್ಬರಿಗೆ ಮಾತ್ರ ಕಾಂಟ್ರಾಕ್ಟ್ ನೀಡಲಾಗಿತ್ತು. ಇದೀಗ ವಿಭಾಗವಾರು ಪ್ರಕಾರ ಟೆಂಡರ್ ಕರೆದು ಗುತ್ತಿಗೆ ನೀಡಿ ಅಂತಿಮಗೊಳಿಸಲಾಗಿದೆ ಎಂದು ಹೇಳಿದ್ದಾರೆ.