ಲೋಕಸಭಾ ಚುನಾವಣೆಗೂ ಈ ಫಲಿತಾಂಶಕ್ಕೂ ಸಂಬಂಧ ಇಲ್ಲ: ಯಡಿಯೂರಪ್ಪ
ಬೆಂಗಳೂರು: ಕರ್ನಾಟಕದ ಚುನಾವಣಾ ಫಲಿತಾಂಶದ ಬಗ್ಗೆ ಮಾಜಿ ಸಿಎಂ ಹಾಗೂ ಬಿಜೆಪಿ ಹಿರಿಯ ಮುಖಂಡ ಬಿ . ಎಸ್ . ಯಡಿಯೂ ರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರಿನ ಕಾವೇರಿ ನಿವಾಸದಲ್ಲಿ ಮಾತನಾಡಿದ ಅವರು, ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಭಿವೃದ್ಧಿಪರ ಕೆಲಸಗಳನ್ನು ಮಾಡಿದೆ.
ಆದರೂ ಪಕ್ಷ ಸೋತಿದೆ. ಸೋಲಿಗೆ ಕಾರಣ ಗೊತ್ತಿಲ್ಲ. ಒಂದು ದಿನವೂ ವಿರಮಿಸಿದೆ ಚುನಾವಣಾ ಪ್ರಚಾರಗಳಲ್ಲಿ ಪಾಲ್ಗೊಂಡಿದ್ದೆವು. ಮುಂದಿನ ದಿನಗಳಲ್ಲಿ ಸೋಲಿಗೆ ಆತ್ಮ ವಿಮರ್ಶೆ ಮಾಡಿಕೊಳ್ಳುತ್ತೇವೆ ಎಂದಿರುವ ಯಡಿಯೂರಪ್ಪ,
ರಾಜ್ಯದ ಅಭಿವೃದ್ಧಿಗೆ ಪಕ್ಷದ ಸಹಕಾರ ಇರುತ್ತದೆ ಎಂದಿದ್ದಾರೆ. ಹಾಗೆಯೇ, ರಾಜ್ಯದ ಮತದಾರರಿಗೂ ಯಡಿಯೂರಪ್ಪ ಅಭಿನಂದನೆ ಹೇಳಿದ್ದಾರೆ. ಇದೇ ವೇಳೆ, ಬಹುಮತ ಗಳಿಸಿ ಸರ್ಕಾರ ರಚಿಸಲಿರುವ ಕಾಂಗ್ರೆಸ್ ಪಕ್ಷಕ್ಕೆ ಅಭಿವೃದ್ಧಿ ವಿಚಾರದಲ್ಲಿ ಬಿಜೆಪಿ ವಿರೋಧ ಪಕ್ಷವಾಗಿ ಸಹಕಾರ ಕೊಡುತ್ತದೆ ಎಂದು ಯಡಿಯೂರಪ್ಪ ಹೇಳಿದ್ಧಾರೆ. ಹಾಗೆಯೇ, ಮನೆಮನೆಗೆ ಹೋಗಿ ಕಾಂಗ್ರೆಸ್ ಪಕ್ಷದವರು ಹಲವು ಗ್ಯಾರಂಟಿಗಳನ್ನು ಕೊಟ್ಟಿದ್ದಾರೆ.
ಈ ಭರವಸೆಗಳನ್ನು ಕಾಂಗ್ರೆಸ್ ಈಡೇರಿಸಲಿ ಎಂದು ಮಾಜಿ ಮುಖ್ಯಮಂತ್ರಿ ಆಗ್ರಹಿಸಿದ್ದಾರೆ. ಇನ್ನು, ಲೋಕಸಭಾ ಚುನಾವಣೆಗೂ ಈ ಫಲಿತಾಂಶಕ್ಕೂ ಸಂಬಂಧ ಇಲ್ಲ ಎಂದು ಬಿಎಸ್ವೈ ಹೇಳಿದ್ದಾರೆ. ರಾಜ್ಯದಲ್ಲಿ ಬಿಜೆಪಿ 2 ಕ್ಷೇತ್ರದಿಂದ ಬೆಳೆದು ಈಗ ಸ್ವಂತವಾಗಿ ಅಧಿಕಾರಕ್ಕೆ ಹಿಡಿಯುವ ಮಟ್ಟಕ್ಕೆ ಏರಿದೆ. ಈಗ ಸೋಲಾದರೂ ಲೋಕಸಭಾ ಚುನಾವಣೆಯಲ್ಲಿ ಹಿಂದಿನಂತೆ 25 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸುತ್ತದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.