ಮೋದಿ ಮತ್ತು ಅಮಿತ್ ಶಾ ಅವರಿಗೆ ರಾಜ್ಯದ ಮೇಲೆ ಪ್ರೀತಿ ಹೆಚ್ಚಾಗಿದೆ: ಶಾಸಕ ಪ್ರಿಯಾಂಕ್ ಖರ್ಗೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಅಮಿತ್ ಶಾ ಅವರಿಗೆ ರಾಜ್ಯದ ಮೇಲೆ ಪ್ರೀತಿ ಹೆಚ್ಚಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು,ಬಿಜೆಪಿ ಸಮಾವೇಶಗಳಲ್ಲಿ ನಮ್ಮ ಮುಖ್ಯಮಂತ್ರಿ ಬೊಮ್ಮಾಯಿ ಅವರ ಹೆಸರು ಪ್ರಸ್ತಾಪವನ್ನೇ ಮಾಡುತ್ತಿಲ್ಲ.
ಶಿವಮೊಗ್ಗದ ಕಾರ್ಯಕ್ರಮದಲ್ಲಿ ಅವರು ಮುಖ್ಯಮಂತ್ರಿಗಳ ಹೆಸರೂ ತೆಗೆದುಕೊಳ್ಳಲಿಲ್ಲ. ಒರ್ವ ಮುಖ್ಯಮಂತ್ರಿಗಳ ಬಗ್ಗೆ ಅವರಿಗೆ ಇಷ್ಟೋಂದು ಸಿಟ್ಟು ಯಾಕೆ ಎಂಬ ಪ್ರಶ್ನೆ ಕಾಡುತ್ತಿದೆ. ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಈ ಸರ್ಕಾರ 40% ಸರ್ಕಾರವಾಗಿದೆ,
ಹೀಗಾಗಿ ನಾವು ಇವರ ಹೆಸರು ತೆಗೆದುಕೊಂಡರೆ ಜನ ನಮಗೆ ಮತ ಹಾಕುವುದಿಲ್ಲ ಎಂಬ ಕಾರಣಕ್ಕೆ ರಾಜ್ಯ ನಾಯಕರ ಹೆಸರು ಹೇಳುತ್ತಿಲ್ಲ ಎಂದು ವ್ಯಂಗ್ಯವಾಡಿದರು. ಸಂಡೂರಿನಲ್ಲಿ ಅಮಿತ್ ಶಾ ಅವರು ಮೋದಿ ಅವರ ಮುಖ ನೋಡಿ ಮತ ನೀಡಿ ಭ್ರಷ್ಟಾಚಾರ ಮುಕ್ತ ಆಡಳಿತ ನೀಡುತ್ತೇವೆ ಎಂದಿದ್ದಾರೆ. ಇಲ್ಲಿ ಸದನದಲ್ಲಿ ಡಬಲ್ ಇಂಜಿನ್ ಸರ್ಕಾರ ಎಂದು ಹೇಳುತ್ತಾರೆ. ಇಲ್ಲಿ ರಾಜ್ಯ ನಾಯಕರು ಜನರ ವಿಶ್ವಾಸ ಇಟ್ಟುಕೊಂಡಿಲ್ಲ. ಈ ಸರ್ಕಾರ 40% ಸರ್ಕಾರ, ಪೇಸಿಎಂ ಎಂದು ದೇಶದಲ್ಲಿ ಕುಖ್ಯಾತಿ ಪಡೆದಿದ್ದಾರೆ. ಹೀಗಾಗಿ ಮೋದಿ ಮುಖ ನೋಡಿ ಮತ ನೀಡಿ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.