ಕಾನೂನಿನೊಂದಿಗೆ ಆಟವಾಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಾಗುವುದಿಲ್ಲ: ಪ್ರಿಯಾಂಕಾ ಗಾಂಧಿ
ನವದೆಹಲಿ: ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಆದರೆ, ಅದು ದೇಶದ ಕಾನೂನಿನ ಪ್ರಕಾರವಾಗಿರಬೇಕು ಮತ್ತು ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಕಾನೂನಿನೊಂದಿಗೆ ಆಟವಾಡುವುದು ಪ್ರಜಾಪ್ರಭುತ್ವದಲ್ಲಿ ಸರಿಯಾಗುವುದಿಲ್ಲ ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಭಾನುವಾರ ಹೇಳಿದ್ದಾರೆ.
ಉತ್ತರ ಪ್ರದೇಶದಲ್ಲಿ ಗ್ಯಾಂಗ್ಸ್ಟರ್-ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ಒಂದು ದಿನದ ನಂತರ ಈ ಹೇಳಿಕೆ ನೀಡಿದ್ದಾರೆ.
ಅತೀಕ್ ಅಹ್ಮದ್ (60) ಮತ್ತು ಅವರ ಸಹೋದರ ಅಶ್ರಫ್ ಅವರನ್ನು ತಪಾಸಣೆಗಾಗಿ ಪ್ರಯಾಗ್ರಾಜ್ನಲ್ಲಿರುವ ವೈದ್ಯಕೀಯ ಕಾಲೇಜಿಗೆ ಪೊಲೀಸರು ಕರೆದೊಯ್ಯುತ್ತಿದ್ದಾಗ ಶನಿವಾರ ರಾತ್ರಿ ಮಾಧ್ಯಮಗಳೊಂದಿಗೆ ಮಾತನಾಡುವ ವೇಲೆ ಪತ್ರಕರ್ತರಂತೆ ಬಂದಿದ್ದ ಆರೋಪಿಗಳು ಗುಂಡು ಹಾರಿಸಿ ಹತ್ಯೆ ಮಾಡಿದ್ದರು.
ಹಿಂದಿಯಲ್ಲಿ ಟ್ವೀಟ್ ಮಾಡಿರುವ ಪ್ರಿಯಾಂಕಾ ಗಾಂಧಿ, ‘ದೇಶದ ಕಾನೂನನ್ನು ಸಂವಿಧಾನದಲ್ಲಿ ಬರೆಯಲಾಗಿದೆ ಮತ್ತು ಈ ಕಾನೂನು ಅತ್ಯುನ್ನತವಾಗಿದೆ. ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಆದರೆ, ಅದು ದೇಶದ ಕಾನೂನಿನ ಪ್ರಕಾರ ಇರಬೇಕು. ಯಾವುದೇ ರಾಜಕೀಯ ಉದ್ದೇಶಕ್ಕಾಗಿ ಕಾನೂನು ಮತ್ತು ನ್ಯಾಯಾಂಗ ಪ್ರಕ್ರಿಯೆಯೊಂದಿಗೆ ಆಟವಾಡುವುದು ಅಥವಾ ಉಲ್ಲಂಘಿಸುವುದು ನಮ್ಮ ಪ್ರಜಾಪ್ರಭುತ್ವಕ್ಕೆ ಹೊಂದಿಕೆಯಾಗುವುದಿಲ್ಲ ಎಂದು ಹೇಳಿದ್ದಾರೆ.