ಸರ್ಕಾರಿ ಜಮೀನುಗಳ ತೆರವುಗೊಳಿಸುವ ಅಧಿಕಾರ ಜಿಲ್ಲಾಧಿಕಾರಿಗೆ ಮಾತ್ರ ಇರುತ್ತದೆ: ಹೈಕೋರ್ಟ್
ಬೆಂಗಳೂರು: ಸರ್ಕಾರಿ ಜಮೀನುಗಳ ತೆರವುಗೊಳಿಸುವ ಅಧಿಕಾರ ಜಿಲ್ಲಾಧಿಕಾರಿಗೆ ಮಾತ್ರ ಇರುತ್ತದೆ ಎಂದು ಬೆಂಗಳೂರಿನ ಹೈಕೋರ್ಟ್ ಪೀಠ ತಿಳಿಸಿದೆ. ಸರ್ಕಾರಿ ಒತ್ತುವರಿ ಸಂಬಂಧ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ತಹಶೀಲ್ದಾರ್ ನೀಡಿದ್ದ ನೋಟಿಸ್ ರದ್ದು ಪಡಿಸುವಂತೆ ಕೋರಿ ಸ್ಥಳೀಯ ಬಾಲಪ್ಪ ಸೇರಿ ಇತರೆ ಎಂಟು ಮಂದಿ ರೈತರು ತಕರಾರು ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರಿದ್ದ ನ್ಯಾಯಪೀಠ, ಒತ್ತುವರಿದಾರರಿಗೆ ನೋಟಿಸ್ ನೀಡುವ ಅಧಿಕಾರ ತಹಶೀಲ್ದಾರ್ ಅವರಿಗೆ ಇಲ್ಲ ಎಂದು ಸ್ಪಷ್ಟಪಡಿಸಿದೆ. ಈ ಪ್ರಕರಣದಲ್ಲಿ ಕರ್ನಾಟಕ ಭೂ ಕಂದಾಯ ಕಾಯ್ದೆ-1964ರ ಸೆಕ್ಷನ್ 94 ಮತ್ತು 39 ಅಡಿಯಲ್ಲಿ ಅರ್ಜಿದಾರರಿಗೆ ತಹಶೀಲ್ದಾರ್ ನೋಟಿಸ್ ಜಾರಿ ಮಾಡಿದ್ದಾರೆ.
ಆದರೆ ಸೆಕ್ಷನ್ 39ರ ಪ್ರಕಾರ ಸರ್ಕಾರಿ ಜಮೀನನ್ನು ಯಾರಾದರೂ ಒತ್ತುವರಿ ಮಾಡಿದ್ದರೆ, ಅದನ್ನು ತೆರವು ಮಾಡಬೇಕಾದರೆ ಜಿಲ್ಲಾಧಿಕಾರಿಗೆ ಅಧಿಕಾರವಿದೆ. ಆದ್ದರಿಂದ ತೆರವು ಕಾರ್ಯಾಚರಣೆ ಜಿಲ್ಲಾಧಿಕಾರಿ ಮಾತ್ರ ಮಾಡಬೇಕು. ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಯೇ ಆದೇಶ ನೀಡಬೇಕು. ಅಲ್ಲದೆ, ತೆರವು ಕಾರ್ಯಾಚರಣೆಗೂ ಮುನ್ನ ಒತ್ತುವರಿದಾರರಿಗೆ ನೋಟಿಸ್ ಜಾರಿಗೊಳಿಸಬೇಕು. ಅದನ್ನು ಸ್ವೀಕರಿಸಿದ ನಂತರ ಜಾಗದ ತೆರವಿಗೆ ಕಾಲಾವಕಾಶ ನೀಡಿ ಮುಂದಿನ ಪ್ರಕ್ರಿಯೆ ಕೈಗೊಳ್ಳಬೇಕು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ಉಲ್ಲೇಖಿಸಿದೆ.