ಬಿಟ್ ಕಾಯಿನ್ ಹಗರಣದ ಮರು ತನಿಖೆ ವಿಚಾರ
ಬೆಂಗಳೂರು ;- ಬಿಟ್ ಕಾಯಿನ್ ಹಗರಣದ ಮರು ತನಿಖೆ ಕುರಿತಂತೆ ಬೆಂಗಳೂರು ಪೊಲೀಸ್ ಕಮಿಷನರ್ ಬಿ.ದಯಾನಂದ್ ಪ್ರತಿಕ್ರಿಯೆ ನೀಡಿದ್ದಾರೆ.
ಈ ಸಂಬಂಧ ಬೆಂಗಳೂರಿನ ಕಮಿಷನರ್ ಕಚೇರಿಯಲ್ಲಿ ಮಾತನಾಡಿದ ಅವರು, ಪ್ರಕರಣದಲ್ಲಿ ಈಗಾಗಲೇ ತನಿಖೆಯಾಗಿ ಪ್ರಾಥಮಿಕ ಆರೋಪಪಟ್ಟಿ ಸಲ್ಲಿಸಿರುವುದು ಒಂದು ಹಂತ.
ಆದರೆ, ಇದರಲ್ಲಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದ ಹ್ಯಾಕರ್ಸ್ ಪಾತ್ರವಿದೆ. ಸರ್ಕಾರದ ಇ-ಪ್ರೊಕ್ಯೂರ್ಮೆಂಟ್ ಪೋರ್ಟಲ್ ಸಹ ಹ್ಯಾಕ್ ಮಾಡಲಾಗಿದೆ. ಆದ್ದರಿಂದ ಹೆಚ್ಚಿನ ತನಿಖೆಯಾಗಬೇಕು ಎಂದು ಮನವಿ ಮಾಡಿದ್ದೇವೆ. ಯಾರಿಂದ ತನಿಖೆಯಾಗಬೇಕು ಎಂಬುದು ಸರ್ಕಾರ ಮತ್ತು ಡಿಜಿ & ಐಜಿಪಿ ಅವರ ಮಟ್ಟದಲ್ಲಿ ನಿರ್ಧಾರವಾಗಲಿದೆ’ ಎಂದರು.
ಇನ್ನೂ ರಾಷ್ಟ್ರಮಟ್ಟದಲ್ಲಿ ಸದ್ದು ಮಾಡಿದ್ದ ಬಿಟ್ ಕಾಯಿನ್ ಪ್ರಕರಣವನ್ನ ಉನ್ನತಮಟ್ಟದ ತನಿಖೆಗೊಳಪಡಿಸುವಂತೆ ರಾಜ್ಯ ಡಿಜಿ & ಐಜಿಪಿ ಅಲೋಕ್ ಮೋಹನ್ರಿಗೆ ಬೆಂಗಳೂರು ಪೊಲೀಸ್ ಇಲಾಖೆ ಪತ್ರ ಬರೆದಿದೆ.
ಹಗರಣದ ಹಿಂದೆ ಅಂತಾರಾಷ್ಟ್ರೀಯ ಮಟ್ಟದ ವಂಚನೆ ಜಾಲವಿರುವ ಸಂಶಯ ಹಾಗೂ ಪರಿಣಿತ ವಿಧಿ ವಿಧಾನಗಳಿಂದ ಕೃತ್ಯ ಎಸಗಿರುವುದರಿಂದ ಪ್ರಕರಣದ ತನಿಖೆಯನ್ನ ವಿಶೇಷ ತನಿಖಾ ತಂಡಕ್ಕೆ ವಹಿಸುವಂತೆ ಪತ್ರದಲ್ಲಿ ಮನವಿ ಮಾಡಲಾಗಿದೆ.