ಏಪ್ರಿಲ್ 1ರ ವೇಳೆಗೆ ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟ: ಹೈಕೋರ್ಟ್ ಗೆ ಸರ್ಕಾರದ ಭರವಸೆ
ಬೆಂಗಳೂರು: ಏಪ್ರಿಲ್ 1ರ ವೇಳೆಗೆ ಜಿಪಂ, ತಾಪಂ ಚುನಾವಣೆಗೆ ಮೀಸಲಾತಿ ಪ್ರಕಟಿಸುವುದಾಗಿ ಬೆಂಗಳೂರಿನ ಹೈಕೋರ್ಟ್ ಗೆ ರಾಜ್ಯ ಸರ್ಕಾರ ಮಾಹಿತಿ ನೀಡಿದೆ. ರಾಜ್ಯ ಚುನಾವಣಾ ಆಯೋಗ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಆಶೋಕ್ ಎಸ್.
ಕಿಣಗಿ ಅವರಿದ್ದ ನ್ಯಾಯಪೀಠಕ್ಕೆ ಸರ್ಕಾರದ ಪರ ಹಾಜರಾಗಿದ್ದ ಅಡ್ವೋಕೇಟ್ ಜನರಲ್ ಮಾಹಿತಿ ನೀಡಿದರು.
ಅಲ್ಲದೆ, ಈಗಾಗಲೇ ಕ್ಷೇತ್ರ ಪುನರ್ ವಿಂಗಡಣೆಗೆ ಸಂಬಂಧಿಸಿದಂತೆ ಮಾರ್ಚ್ 1ರಂದು ಗೆಜೆಟ್ ನೋಟಿಫಿಕೇಷನ್ ಹೊರಡಿಸಲಾಗಿದೆ. ಜೊತೆಗೆ, ಬಿಬಿಎಂಪಿ ಚುನಾವಣೆಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಏಪ್ರಿಲ್ 1ರವರೆಗೆ ಕಾಲಾವಕಾಶ ನೀಡಿದೆ. ಅಷ್ಟರ ಒಳಗಾಗಿ ಮೀಸಲಾತಿ ಪಟ್ಟಿ ಸಿದ್ಧಪಡಿಸಿ, ಮುಂದಿನ ಕ್ರಮಕ್ಕಾಗಿ ರಾಜ್ಯ ಚುನಾವಣಾ ಆಯೋಗಕ್ಕೆ ಸಲ್ಲಿಸಲಾಗುವುದು ಎಂದು ವಿವರಿಸಿದರು. ಈ ಅಂಶ ದಾಖಲಿಸಿಕೊಂಡ ನ್ಯಾಯಪೀಠ ವಿಚಾರಣೆಯನ್ನು ಏಪ್ರಿಲ್ 12ಕ್ಕೆ ಮುಂದೂಡಿತು.