ಅಂಗನವಾಡಿ ಕಾರ್ಯಕರ್ತೆ ಸಾವಿಗೆ ಬಿಜೆಪಿಯ ಹೊಣೆಗೇಡಿತನ ಕಾರಣ: ವಿಪಕ್ಷ ನಾಯಕ ಸಿದ್ದರಾಮಯ್ಯ
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ ಮಾಡಿ ಊರಿಗೆ ಮರಳಿದ ನಂತರ ಅಂಗನವಾಡಿ ಕಾರ್ಯಕರ್ತೆ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಬೆಂಗಳೂರಿನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನೀಲಮ್ಮ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ ಎಂದು ಗುಡುಗಿದ್ದಾರೆ. ಶಿವಮೊಗ್ಗದ ಶಿಕಾರಿಪುರ ತಾಲೂಕಿನ ಇಡುಕ್ಕಿನ ಹೊಸಕೊಪ್ಪ ಗ್ರಾಮದ ಅಂಗನವಾಡಿ ಸಹಾಯಕಿ ನೀಲಮ್ಮ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದಾಗ ಅವರಿಗೆ ಅನಾರೋಗ್ಯ ಸಮಸ್ಯೆ ಎದುರಾಗಿತ್ತು. ಹೀಗಾಗಿ ಅವರು ತಮ್ಮ ಊರಿಗೆ ಮರಳಿದ್ದರು. ಆದ್ರೆ ಊರಿಗೆ ಹೋದ ಬಳಿಕ ಅವರ ಪ್ರಾಣ ಪಕ್ಷಿ ಹಾರಿಹೋಗಿದೆ.
ಸದ್ಯ ಅಂಗನವಾಡಿ ಸಹಾಯಕಿ ಸಾವಿನ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಟ್ವಿಟ್ ಮೂಲಕ ಸರ್ಕಾರದ ವಿರುದ್ಧ ಕೆಂಡಕಾರಿದ್ದಾರೆ. ನೀಲಮ್ಮ ಅವರ ಸಾವಿಗೆ ರಾಜ್ಯ ಬಿಜೆಪಿ ಸರ್ಕಾರದ ಹೊಣೆಗೇಡಿತನ ಕಾರಣ. ಮೃತರ ಕುಟುಂಬಕ್ಕೆ ಸರ್ಕಾರ ಸೂಕ್ತ ಪರಿಹಾರ ನೀಡಬೇಕು ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಆಲಿಸುವ ಸೌಜನ್ಯವೂ ಸರ್ಕಾರಕ್ಕೆ ಇಲ್ಲ. ಆರುವ ದೀಪ ಜೋರಾಗಿ ಉರಿಯುತ್ತದೆಯಂತೆ. ಬಿಜೆಪಿ ಸರ್ಕಾರವೂ ಹಾಗೇ ಎಂದು ಟ್ವಿಟ್ ಮೂಲಕ ಕಿಡಿಕಾರಿದ್ದಾರೆ.