ಬೆಂಗಳೂರಲ್ಲಿ ಸುರಿದ ಮಳೆಗೆ ಕೆರೆಯಂತಾದ ರಸ್ತೆಗಳು
ಬೆಂಗಳೂರು: ಸೋಮವಾರ ಸುರಿದ ಭಾರೀ ಮಳೆಗೆ ಸಿಲಿಕಾನ್ ಸಿಟಿಯಲ್ಲಿ ವಾಹನ ಸವಾರರು ಪರದಾಡುವಂತಾಗಿದೆ. ಮಾರತಹಳ್ಳಿ ಬಳಿ ಸಪ್ತಗಿರಿ ಲೇಔಟ್ ನಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ಮನೆಯಿಂದ ನೀರು ಹೊರಹಾಕಲು ಜನರ ಹರಸಾಹಸ ಪಟ್ಟಿದ್ದಾರೆ.
ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ಟೌನ್ ಹಾಲ್, ಕಾರ್ಪೋರೇಷನ್ ಹಾಗೂ ಕೋರಮಂಗಲ ಸುತ್ತಮುತ್ತ ಭಾರೀ ಮಳೆಯಾಗಿದ್ದು, ವಾಹನ ಸವಾರರು ಕೆಲಕಾಲ ಪರದಾಟ ಅನುಭವಿಸಿದರು. ಯಮಲೂರಿನ ರಸ್ತೆಯಲ್ಲಿ ಮಳೆ ನೀರು ತುಂಬಿಹೋಗಿತ್ತು. ಕೆರೆಯಂತಾದ ರಸ್ತೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.
ಕರಾವಳಿ ಭಾಗ ಸೇರಿ ರಾಜ್ಯದ ನಾನಾ ಭಾಗದಲ್ಲಿ ವರುಣಾರ್ಭಟದ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಒಳನಾಡು, ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು ಉಡುಪಿ, ಹಾಸನ, ಶಿವಮೊಗ್ಗ ಹಾಗೂ ಕೊಡಗು ಸೇರಿದಂತೆ ಬಹುತೇಕ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವು ಭಾಗದಲ್ಲಿ ಮಳೆಯಾಗಲಿದೆ.
ರಾಜ್ಯದ ಕೆಲವೆಡೆ ಬಿರುಗಾಳಿ, ಗುಡುಗು ಮಿಂಚಿನ ಸಾಧ್ಯತೆ. ಗಾಳಿಯ ವೇಗವು ಗಂಟೆಗೆ 40 ರಿಂದ 50 ಕಿಲೋ ಮೀಟರ್ ವೇಗದಲ್ಲಿ ಸಾಗುವ ಸಾಧ್ಯತೆ ಇದೆ. ಮಂಗಳವಾರ ಕೂಡ ಗಾಳಿ ವೇಗ ಇದೇ ರೀತಿ ಮುಂದುವರೆಯುವ ಸಾಧ್ಯತೆ ಇದೆ.