ಜೈಲಿನಲ್ಲಿ ಶಶಿಕಲಾಗೆ ವಿಶೇಷ ಸೌಲಭ್ಯ: ಪ್ರಾಸಿಕ್ಯೂಷನ್ಗೆ ಅನುಮತಿಗೆ ಹೈಕೋರ್ಟ್ ತಡೆ
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಶಶಿಕಲಾಗೆ ವಿಶೇಷ ಸೌಲಭ್ಯ ನೀಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಕೃಷ್ಣ ಕುಮಾರ್ ವಿರುದ್ಧ ಪ್ರಾಸಿಕ್ಯೂಷನ್ಗೆ ಪೂರ್ವಾನುಮತಿ ನೀಡಿದ್ದ ಕ್ರಮಕ್ಕೆ ಬೆಂಗಳೂರಿನ ಹೈಕೋರ್ಟ್ ತಡೆ ನೀಡಿದೆ.
ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಚ್ ಟಿ ನರೇಂದ್ರ ಪ್ರಸಾದ್ ಅವರಿದ್ದ ನ್ಯಾಯಪೀಠ, ಅರ್ಜಿ ಕುರಿತಾಗಿ ಮಂದಿನ ವಿಚಾರಣೆ ಮಾಡುವಂತೆ ರಾಜ್ಯ ಸರ್ಕಾರ ನೀಡಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಿ ಆದೇಶ ಹೊರಡಿಸಿದೆ.
ಅಲ್ಲದೆ, ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಗೃಹ ಇಲಾಖೆ ಅಧೀನ ಕಾರ್ಯದರ್ಶಿ, ಭ್ರಷ್ಟಾಚಾರ ನಿಗ್ರಹ ದಳದ ಹೆಚ್ಚುವರಿ ಮಹಾ ನಿರ್ದೇಶಕ ಮತ್ತು ಅಧೀಕ್ಷಕರಿಗೆ ನೋಟಿಸ್ ಜಾರಿಗೊಳಿಸಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆಯೂ ನಿರ್ದೇಶನ ನೀಡಿದೆ. ಅರ್ಜಿದಾರ ಪರವಾದ ಮಂಡಿಸಿದ ಹಿರಿಯ ವಕೀಲ ಎ ಎಸ್ ಪೊನ್ನಣ್ಣ, ಶಶಿಕಲಾಗೆ ಜೈಲಿನಲ್ಲಿ ವಿಶೇಷ ಸೌಲಭ್ಯ ಕಲ್ಪಿಸಲು ನಿವೃತ್ತ ಕಾರಾಗೃಹ ಡಿಜಿಪಿ ಎಚ್.ಎನ್. ಸತ್ಯಾನಾರಾಯಣ ರಾವ್ ಅವರು ಎರಡು ಕೋಟಿ ಹಣ ಪಡೆದಿರುವ ಆರೋಪವಿದೆ ಎಂಬ ವಿಚಾರವನ್ನು ಕೋರ್ಟ್ ಗಮನಕ್ಕೆ ತಂದರು.
ಪ್ರಕರಣದ ಕುರಿತು ನಿವೃತ್ತ ಐಎಎಸ್ ಅಧಿಕಾರಿ ಎಸ್.ವಿನಯ್ ಕುಮಾರ್ ವಿಚಾರಣೆ ನಡೆಸಿ ಸಲ್ಲಿಸಿರುವ ವರದಿಯನ್ನು ರಾಜ್ಯ ಸರ್ಕಾರವು 2018ರ ಫೆ.26ರಂದು ಒಪ್ಪಿಕೊಂಡಿದೆ. ಆ ವರದಿಯಲ್ಲಿ ಅರ್ಜಿದಾರರ ವಿರುದ್ಧದ ಯಾವುದೇ ಆರೋಪವಿಲ್ಲ ಎಂದು ನ್ಯಾಯಪೀಠಕ್ಕೆ ವರದಿಯಲ್ಲಿನ ಅಂಶಗಳನ್ನು ವಿವರಿಸಿದರು.