ವೃದ್ಧೆ ಸಾವಿಗೆ ಕಾರಣವಾಗಿದ್ದ ಆರೋಪಿತೆಯ ಶಿಕ್ಷೆ ರದ್ದುಗೊಳಿಸಿದ ಹೈಕೋರ್ಟ್
ಬೆಂಗಳೂರು ;– ಮೇಕೆ ವಿಚಾರವಾಗಿ ನಡೆದ ಜಗಳದಲ್ಲಿ ವೃದ್ಧೆಗೆ ಹಲ್ಲೆ ನಡೆಸಿ ಸಾವಿಗೆ ಕಾರಣವಾಗಿದ್ದ ಆರೋಪಿತೆಯ ಶಿಕ್ಷೆ ರದ್ದುಗೊಳಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಕೆ. ನಟರಾಜನ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ. ಅಲ್ಲದೇ, ಆರೋಪಿತ ಮಹಿಳೆಗೆ ಇಬ್ಬರು ಮಕ್ಕಳಿದ್ದಾರೆ.
ಘಟನೆ ನಡೆದ ದಿನದಿಂದ ಈವರೆಗೆ ಆಕೆ ಇತರೆ ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗದೇ ಸನ್ನಡತೆ ಕಾಯ್ದುಕೊಂಡಿದ್ದಾರೆ. ವೃದ್ಧೆಯನ್ನು ಕೊಲೆ ಮಾಡುವ ಉದ್ದೇಶವೂ ಆಕೆಗೆ ಇರಲಿಲ್ಲ. ಕ್ಷಣ ಮಾತ್ರದಲ್ಲಿ ಉಂಟಾದ ಜಗಳದಲ್ಲಿ ಮಾಡಿದ ಹಲ್ಲೆಯ ಪರಿಣಾಮ ವೃದ್ಧೆ ಸಾವನ್ನಪ್ಪಿದ್ದಾರೆ. ಆದ್ದರಿಂದ ಅಪರಾಧಿಗಳ ಪರಿವೀಕ್ಷಣಾ ಕಾಯ್ದೆ-1958ರ ಸೌಲಭ್ಯ ಆರೋಪಿತಳಿಗೆ ಕಲ್ಪಿಸಿ ಬಂಧಮುಕ್ತ ಮಾಡಬಹುದು ಎಂದು ನ್ಯಾಯಪೀಠ ತನ್ನ ಆದೇಶದಲ್ಲಿ ತಿಳಿಸಿದೆ.
ಜತೆಗೆ, ಆರೋಪಿತ ಮಹಿಳೆ ಒಂದು ವರ್ಷದವರೆಗೆ ಯಾವುದೇ ಅಪರಾಧ ಕೃತ್ಯದಲ್ಲಿ ಭಾಗಿಯಾಗುವುದಿಲ್ಲ ಎಂಬುದಾಗಿ ಮುಚ್ಚಳಿಕೆ ಬರೆದುಕೊಡಬೇಕು ಮತ್ತು ಒಂದು ಲಕ್ಷ ರೂ. ಮೊತ್ತಕ್ಕೆ ವೈಯಕ್ತಿಕ ಬಾಂಡ್ ಮತ್ತು ಒಬ್ಬರ ಭದ್ರತಾ ಖಾತರಿ ಒದಗಿಸಬೇಕು ಎಂದು ಷರತ್ತು ವಿಧಿಸಿ ವಿಚಾರಣಾ ನಾಯಾಲಯ ವಿಧಿಸಿದ ಶಿಕ್ಷೆಯನ್ನು ರದ್ದುಪಡಿಸಿ ಆದೇಶ ನೀಡಿದೆ.