ಗೊಲ್ಲರಹಟ್ಟಿ, ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಮಾಡುತ್ತೇವೆ: ಸಚಿವ ಆರ್ ಅಶೋಕ್
ಬೆಂಗಳೂರು: ರಾಜ್ಯದ ಎಲ್ಲಾ ಗೊಲ್ಲರಹಟ್ಟಿಗಳನ್ನು, ತಾಂಡಾಗಳನ್ನು ಕಂದಾಯ ಗ್ರಾಮವಾಗಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್ ಅಶೋಕ್ ಹೇಳಿದ್ದಾರೆ. ವಿಧಾನಪರಿಷತ್ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯ ನಾಗರಾಜ್ ಯಾದವ್ ಅವರು, ರಾಜ್ಯದಲ್ಲಿ ಎಷ್ಟು ಗೊಲ್ಲರಹಟ್ಟಿಗಳು ಇವೆ?
ಇವುಗಳನ್ನು ಕಂದಾಯ ಗ್ರಾಮ ಮಾಡಲು ಸರ್ಕಾರ ಯಾವ ಕ್ರಮ ತೆಗೆದುಕೊಂಡಿದೆ? ಶೀಘ್ರವಾಗಿ ಎಲ್ಲಾ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮಗಳಾಗಿ ಮಾಡಬೇಕು ಎಂದು ಆಗ್ರಹ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವರು,
ರಾಜ್ಯದಲ್ಲಿ 195 ಗೊಲ್ಲರಹಟ್ಟಿಗಳು ಇವೆ. 187 ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮವಾಗಿ ಪರಿವರ್ತನೆ ಮಾಡಲು ಡಿಸಿ ಗಳು ಶಿಫಾರಸು ಮಾಡಿದ್ದಾರೆ. ಈ ಪೈಕಿ 106 ಗೊಲ್ಲರಹಟ್ಟಿಗಳನ್ನು ಪ್ರಾಥಮಿಕ ಅಧಿಸೂಚನೆ ಮತ್ತು 72 ಗೊಲ್ಲರಹಟ್ಟಿಗಳನ್ನು ಅಂತಿಮ ಅಧಿಸೂಚನೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ನಾನು ಅಧಿಕಾರಕ್ಕೆ ಬಂದ ಮೇಲೆ ಗೊಲ್ಲರಹಟ್ಟಿಗಳನ್ನು ಕಂದಾಯ ಗ್ರಾಮ ಮಾಡುವ ಕೆಲಸ ಮಾಡಿದ್ದೇನೆ ಎಂದು ಹೇಳಿದ್ದಾರೆ.