ಮುಂಬೈ ವಿರುದ್ಧ ಭರ್ಜರಿ ಗೆಲುವಿನ ಬಳಿಕ ವಿರಾಟ್ ಕೊಹ್ಲಿ ಹೇಳಿದ್ದೇನು?
ಹದಿನಾರನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ 8 ವಿಕೆಟ್ಗಳ ಗೆಲುವಿಗೆ ವಿರಾಟ್ ಕೊಹ್ಲಿ ಸಂತಸ ವ್ಯಕ್ತಪಡಿಸಿದ್ದಾರೆ ಹಾಗೂ ಮುಂಬೈ ಇಂಡಿಯನ್ಸ್ ಪಂದ್ಯದಲ್ಲಿ ನಡೆದ ಹಲವು ಪ್ರಮುಖ ಸಂಗತಿಗಳ ಬಗ್ಗೆ ಮಾತನಾಡಿದ್ದಾರೆ.
ಭಾನುವಾರ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದ್ದ ಹೈವೋಲ್ಟೇಜ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನೀಡಿದ್ದ 172 ರನ್ ಸವಾಲಿನ ಗುರಿ ಹಿಂಬಾಲಿಸಿದ ಆರ್ಸಿಬಿ, ನಾಯಕ ಫಾಫ್ ಡು ಪ್ಲೆಸಿಸ್ (73 ರನ್, 43 ಎಸೆತ, 5 ಫೋರ್, 6 ಸಿಕ್ಸರ್) ಮತ್ತು ಮಾಜಿ ನಾಯಕ ವಿರಾಟ್ ಕೊಹ್ಲಿ (82* ರನ್, 49 ಎಸೆತ, 6 ಫೋರ್, 5 ಸಿಕ್ಸರ್) ಅವರ ಅರ್ಧಶತಕದ ಬಲದಿಂದ 16.2 ಓವರ್ಗಳಲ್ಲೇ ಗೆದ್ದು ಸಂಭ್ರಮಿಸಿತು.
ಮುಂಬೈ ವಿರುದ್ದದ ಪಂದ್ಯದ ಗೆಲುವಿನ ಬಳಿಕ ಪೋಸ್ಟ್ ಮ್ಯಾಚ್ ಪ್ರೆಸೆಂಟೇಷನ್ನಲ್ಲಿ ಮಾತನಾಡಿದ ವಿರಾಟ್ ಕೊಹ್ಲಿ, ಮೂರು ವರ್ಷಗಳ ಬಳಿಕ ತವರು ಅಂಗಣದಲ್ಲಿ ಆಡಿ ಗೆಲುವು ಪಡೆದ ಬಗ್ಗೆ ಸಂತಸ ವ್ಯಕ್ತಪಡಿಸಿದರು. ಅಷ್ಟೇ ಅಲ್ಲದೆ ತಮ್ಮ ತಂಡದ ಪ್ರದರ್ಶನದ ಬಗ್ಗೆ ಮುಕ್ತಕಂಠದಿಂದ ಗುಣಗಾಣ ಮಾಡಿದ್ದಾರೆ.