ಯಶಸ್ವಿನಿ ಯೋಜನೆ ಸದಸ್ಯತ್ವ ನೋಂದಣಿ ಅವಧಿ ವಿಸ್ತರಣೆ: ರಾಜ್ಯ ಸರ್ಕಾರ ಆದೇಶ
ಬೆಂಗಳೂರು: ಯಶಸ್ವಿನಿ ಯೋಜನೆ ಸದಸ್ಯತ್ವ ನೋಂದಣಿ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಫೆಬ್ರವರಿ 28ಕ್ಕೆ ಸದಸ್ಯತ್ವ ನೋಂದಣಿಗೆ ಕೊನೆಯ ದಿನವಾಗಿತ್ತು. ಅರ್ಹ ಎಲ್ಲಾ ಸದಸ್ಯರು ಹೆಸರು ನೋಂದಾಯಿಸಲು ಮುಂದಾಗುತ್ತಿರುವ ಕಾರಣ ಅವಧಿ ವಿಸ್ತರಣೆ ಮಾಡಲಾಗಿದೆ.
ಪ್ರಾರಂಭದಲ್ಲಿ 30 ಲಕ್ಷ ನೋಂದಣಿಗೆ ಗುರಿ ನಿಗದಿ ಮಾಡಲಾಗಿತ್ತು. ಈವರೆಗೆ 34.52 ಲಕ್ಷ ಸದಸ್ಯರನ್ನು ನೋಂದಾಯಿಸುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ. 2023 ರ ಜ.1ರಿಂದ ನೆಟ್ವರ್ಕ್ ಆಸ್ಪತ್ರೆಗಳಲ್ಲಿ ಫಲಾನುಭವಿಗಳಿಗೆ ಚಿಕಿತ್ಸೆಯನ್ನು ಪ್ರಾರಂಭಿಸಲಾಗಿದೆ. ಈವರೆಗೆ ಸುಮಾರು ಮೂರು ಸಾವಿರ ಫಲಾನುಭವಿಗಳು ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸೌಲಭ್ಯವನ್ನು ಪಡೆದಿದ್ದಾರೆ.
ಈ ನಡುವೆ ವಿವಿಧ ಜಿಲ್ಲೆಗಳಿಂದ ರೈತರು ಮತ್ತು ಸಹಾಯಕರ ಸಂಸ್ಥೆಗಳು ಸರ್ಕಾರಕ್ಕೆ ಮನವಿ ಮಾಡಿದ ಹಿನ್ನೆಲೆಯಲ್ಲಿ ಈ ಹಿಂದೆ ಇದ್ದ ಯಶಸ್ವಿನಿ ಯೋಜನೆ ರದ್ದುಗೊಳಿಸಿ, ಸುಮಾರು ಐದು ವರ್ಷಗಳ ನಂತರ ಪರಿಷ್ಕೃತ ಯಶಸ್ವಿನಿ ಯೋಜನೆಯನ್ನು ಹೊಸದಾಗಿ ಜಾರಿಗೊಳಿಸಲಾಗಿದೆ. ಇದೀಗ ಯೋಜನೆ ಬಗ್ಗೆ ಜನರಿಗೆ ತಿಳುವಳಿಗೆ ನೀಡಿದ ಪರಿಣಾಮ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚೆಚ್ಚು ಮಂದಿ ಹೆಸರು ನೋಂದಾಯಿಸಿಕೊಳ್ಳಲು ಮುಂದೆ ಬರುತ್ತಿದ್ದಾರೆ. ಇನ್ನು ಹಲವು ಸದಸ್ಯರು, ಸದಸ್ಯತ್ವ ಪಡೆಯದಿರುವುದರಿಂದ ಸದಸ್ಯತ್ವ ನೋಂದಣಿ ಅವಧಿಯನ್ನು ಮಾರ್ಚ್ ಅಂತ್ಯದವರೆಗೆ ವಿಸ್ತರಿಸಲು ಪ್ರಸ್ತಾವನೆ ಸಲ್ಲಿಸಲಾಗಿತ್ತು. ಪ್ರಸ್ತಾವನೆಯನ್ನು ಪರಿಗಣಿಸಿರುವ ಸರ್ಕಾರ, ನೋಂದಾಯಿಸುವ ಅವಧಿಯನ್ನು ಮಾರ್ಚ್ 31ರ ವರೆಗೆ ವಿಸ್ತರಣೆ ಮಾಡಿದೆ.